ಬ್ರೇಕ್ ಫೇಲ್ ಆದ ಪರಿಣಾಮ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದು, 13 ವಿದ್ಯಾರ್ಥಿಗಳು ಸೇರಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಗದಗ: ಬ್ರೇಕ್ ಫೇಲ್ ಆದ ಪರಿಣಾಮ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದು, 13 ವಿದ್ಯಾರ್ಥಿಗಳು ಸೇರಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗದಗಜಿಲ್ಲೆಯ ಲಕ್ಷ್ಮೇಶ್ವರತಾಲೂಕಿನ ದೊಡ್ಡೂರು ಸಮೀಪ ನಡೆದಿದೆ.
ಲಕ್ಷ್ಮೇಶ್ವರದಿಂದ ಶಿಗ್ಲಿ, ಬಾಳೆಹೊಸೂರ ಮಾರ್ಗವಾಗಿ ಗುತ್ತಲಕ್ಕೆ ತೆರಳುತ್ತಿದ್ದ ಬಸ್ನಲ್ಲಿ ಸುಮಾರು 90 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ದೊಡ್ಡೂರು ಮತ್ತು ಶಿಗ್ಲಿ ಗ್ರಾಮದ ನಡುವಿನ ಸೇತುವೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಬಸ್ನ ಬ್ರೇಕ್ ಏಕಾಏಕಿ ಫೇಲ್ ಆಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಾಯಗೊಂಡವರಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಳಿಕ ಪ್ರಯಾಣಿಕರು ಕೆಟ್ಟ ರಸ್ತೆ ಹಾಗೂ ಹಳೆಯ ಬಸ್ಗಳೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಸರ್ಕಾರ ಮತ್ತು ಸಾರಿಗೆ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



