ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ಕೇಸ್ ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶಿವಾಜಿನಗರದಲ್ಲಿ ಮಂಗಳವಾರ ನಡೆದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಂಧಿತರಿಂದ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.
ಶಿವಾಜಿನಗರ ಬಸ್ ನಿಲ್ದಾಣದ ಸುತ್ತಮುತ್ತ ರಸ್ತೆಬದಿಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುತ್ತಿದ್ದ ವೇಳೆ ಕೆಲವರು ಕಾರ್ಯಾಚರಣೆಗೆ ಅಡ್ಡಿಪಡಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದರು. ಬಳಿಕ ಏಕಾಏಕಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರನ್ನು ರಸ್ತೆಯಲ್ಲೇ ಬೆನ್ನಟ್ಟಿದ್ದರು. ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ GBA ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಮಾಧವ್ ರಾವ್, ಎಇ ಗೌತಮ್ ಹಾಗೂ ಎಇ ರುಚಿತಾ ಅವರ ಮೇಲೆ ಹಲ್ಲೆ ನಡೆದಿತ್ತು. ಮಹಿಳಾ ಎಂಜಿನಿಯರ್ ರುಚಿತಾ ಅವರ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.



