ಡಿ.ಕೆ.ಸುರೇಶ್ ಅವರ ಸಹೋದರಿಯ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ 3.25 ಕೋಟಿ ರೂ ವಂಚಿನೆ…!

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ 3.25 ಕೋಟಿ ರೂ ವಂಚಿಸಿರುವ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಆರ್.ಆರ್.ನಗರ ಪೊಲೀಸರು, ಸರ್ಚ್ ವಾರೆಂಟ್ ಪಡೆದು ಬುಧವಾರ ಆರೋಪಿ ಐಶ್ವರ್ಯ ಗೌಡ ಮನೆಗೆ ತೆರಳಿ ಪರಿಶೀಲನೆ ನಡೆಸಿದರು.
3.25 ಕೋಟಿ ರೂ. ಹಾಗೂ 430 ಗ್ರಾಂ ಚಿನ್ನಾಭರಣ ವಂಚಿಸಿರುವುದಾಗಿ ಆರೋಪಿಸಿ ಶಿಲ್ಪಾ ಗೌಡ ಎಂಬವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಐಶ್ವರ್ಯ ಗೌಡ ಮನೆ ಶೋಧಿಸಿದರು. ತಪಾಸಣೆ ವೇಳೆ ಮಹತ್ವದ ದಾಖಲಾತಿಗಳನ್ನು ವಶಕ್ಕೆ ಪಡೆದು, ಗುರುವಾರ ವಿಚಾರಣೆಗೆ ಬರುವಂತೆ ತಿಳಿಸಿರುವುದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಆರ್.ಆರ್.ನಗರ ನಿವಾಸಿಯಾಗಿರುವ ಶಿಲ್ಪಾಗೌಡ ಅವರಿಗೆ, ವಂಚನೆ ಎಸಗಿದ ಸ್ಥಳ ತೋರಿಸಬೇಕು, ಸಾಕ್ಷಿದಾರರನ್ನು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಇನ್ನೆರಡು ದಿನದೊಳಗೆ ಬಂದು ಹಾಜರುಪಡಿಸಬೇಕೆಂದು ಪೊಲೀಸರು ನೋಟಿಸ್ ನೀಡಿದ್ದಾರೆ.ವಾರಾಹಿ ಜ್ಯೂವೆಲ್ಲರಿ ಶಾಪ್ ಮಾಲಕಿ ವನಿತಾ ಎಸ್.ಐತಾಳ್ ಎಂಬವರಿಗೆ 9.82 ಕೋಟಿ ರೂ ಮೌಲ್ಯದ 14.660 ಕೆ.ಜಿ ಚಿನ್ನಾಭರಣ ವಂಚಿಸಿರುವ ಪ್ರಕರಣದಲ್ಲಿ ಚಂದ್ರಾ ಲೇಔಟ್ ಪೊಲೀಸರು, ಐಶ್ವರ್ಯ ಗೌಡ ಪತಿ ಕೆ.ಎನ್.ಹರೀಶ್ ಎಂಬವರನ್ನು ಬಂಧಿಸಿದ್ದರು. ಈ ಬಂಧನ ಪ್ರಶ್ನಿಸಿ ಐಶ್ವರ್ಯ ದಂಪತಿ ಹೈಕೋರ್ಟ್ ಮೊರೆ ಹೋಗಿದ್ದರು. ಮಂಗಳವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಂಧನಕ್ಕೆ ಸಕಾರಣವನ್ನು ಲಿಖಿತವಾಗಿ ನೀಡದಿದ್ದಕ್ಕೆ ಆಕ್ಷೇಪಿಸಿ ಮಧ್ಯಂತರ ಜಾಮೀನು ನೀಡಿತ್ತು. ಇದೇ ವೇಳೆ, ಕೂಡಲೇ ಆರೋಪಿತರನ್ನು ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.