ಬೆಂಗಳೂರು

ಸರ್ಕಾರಕ್ಕಿಂತ ಪಕ್ಷ ದೊಡ್ಡದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ‌. ನಮ್ಮ ಪಕ್ಷದಲ್ಲಿ ಯಾರೇ ಸಚಿವರಾದರೂ ಕಾರ್ಯಕರ್ತರು ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು.

* ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು
ಅಧಿಕಾರ ಹಂಚಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ ಎಂದರು.

ಇಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆಯಾಗಿದೆ. ಬೆಳಗಾವಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಚರ್ಚೆ ಮಾಡಲಾಗಿದೆ. ಮಹಾತ್ಮಗಾಂಧೀಜಿ ಅಧ್ಯಕ್ಷತೆಯ ಅಧಿವೇಶನದ 100 ವರ್ಷಾಚರಣೆಯ ಕಾರ್ಯಕ್ರಮವನ್ನು ಜನವರಿ 21 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಂಪುಟ ಪುನಾರಚನೆ ಕಪೋಲಕಲ್ಪಿತ
ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇದೆಲ್ಲಾ ಕಪೋಲಕಲ್ಪಿತ ಅಷ್ಟೆ. ಸಂಪುಟ ಪುನಾರಚನೆ ಕೂಡ ಹೈಕಮಾಂಡಗೆ ಬಿಟ್ಟಿದ್ದು, ವಿಷಯ ಚರ್ಚೆ ಮಾಡುವಂತದ್ದಲ್ಲ ಎಂದು ಸಚಿವರು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button