ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣಿಕರಿಗೆ “ದರ ಹೆಚ್ಚಳದ ಬರೆ” ಹಾಕಿದ ಸರರ್ಕಾರ.

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣಿಕರಿಗೆ ಸರ್ಕಾರ ದರ ಹೆಚ್ಚಳದ ಬರೆ ಹಾಕಿದೆ. ಟಿಕೆಟ್ ದರವನ್ನು 15%ರಷ್ಟು ಹೆಚ್ಚಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಶೇ.15ರಷ್ಟು ದರ ಪರಿಷ್ಕರಣೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಜನವರಿ 5ರಿಂದ ಹೊಸ ದರ ಪರಿಷ್ಕರಣೆ ಅನ್ವಯವಾಗಲಿದೆ. ಎಲ್ಲಾ ಶ್ರೇಣಿಯ ಬಸ್ಗಳಿಗೆ ಸಮಾನವಾಗಿ 15%ರಷ್ಟು ದರ ಪರಿಷ್ಕರಣೆ ಆಗಲಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ಈ ಹಿಂದೆ 2015ರಲ್ಲಿ ದರ ಪರಿಷ್ಕರಣೆಯಾಗಿತ್ತು. ನಾಲ್ಕು ರಸ್ತೆ ಸಾರಿಗೆ ನಿಗಮಗಳ ಡೀಸೆಲ್ ವೆಚ್ಚ 2015ರಲ್ಲಿ ನಿತ್ಯ 9.14 ಕೋಟಿ ರೂ. ಇತ್ತು, ಈಗ ಅದು 13.21 ಕೋಟಿ ರೂ.ಗೆ ಹೆಚ್ಚಳವಾಗಿದೆ. ಸಿಬ್ಬಂದಿ ವೆಚ್ಚವೂ ನಿತ್ಯ 12.85 ಕೋಟಿಯಿಂದ ಪ್ರಸ್ತುತ 18.36 ಕೋಟಿ ರೂ.ಗೆ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು.