ಕಿತ್ತೂರು ಉತ್ಸವ’ಕ್ಕೆ ಭರದ ಸಿದ್ಧತೆ: ಶಾಸಕ ಬಾಬಾಸಾಹೇಬ ಪಾಟೀಲ

ಬೆಳಗಾವಿ: ‘ಚನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
‘ದ್ವಿಶತಮಾನೋತ್ಸವದ ಕಾರಣಕ್ಕಾಗಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಅನುದಾನ ಘೋಷಿಸಿದೆ. ಒಂದೆರಡು ದಿನಗಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಕಿತ್ತೂರು ಕೋಟೆ ಆವರಣದಲ್ಲಿ ‘ರಾಣಿ ಚನ್ನಮ್ಮ ಮುಖ್ಯ ವೇದಿಕೆ’ ನಿರ್ಮಿಸಲಾಗಿದೆ. ವೇದಿಕೆ ಮುಂಭಾಗದಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಿನ ಜನರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ‘ಸರದಾರ ಗುರುಸಿದ್ದಪ್ಪ ವೇದಿಕೆ’ ನಿರ್ಮಿಸಲಾಗಿದೆ. ಎರಡೂ ಕಡೆ ಮೂರು ದಿನ ವೈವಿಧ್ಯಮಯ ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ’ ಎಂದರು.
‘ಫಲ-ಪುಷ್ಪ ಪ್ರದರ್ಶನ, ವಸ್ತುಪ್ರದರ್ಶನ, ಆರೋಗ್ಯ ಮೇಳ, ಕ್ರೀಡೆ ಮತ್ತು ದೋಣಿ ವಿಹಾರ ಆಯೋಜಿಸಲಾಗಿದೆ. ಜಲಸಾಹಸ ಕ್ರೀಡೆ, ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಕುಸ್ತಿ ಪಂದ್ಯಾವಳಿ ನಡೆಯಲಿವೆ. ಬೈಕ್ ರ್ಯಾಲಿ, ಮ್ಯಾರಥಾನ್ ಸೇರಿ ಮಹಿಳೆಯರಿಗಾಗಿ ಪ್ರತ್ಯೇಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಉತ್ಸವ ವೀಕ್ಷಣೆಗೆ ಆಗಮಿಸುವವರಿಗೆ ಬಸ್ ವ್ಯವಸ್ಥೆ ಕೂಡ ಮಾಡಲಾಗಿದೆ’ ಎಂದರು.