Uncategorized
ಒಂದು ವಾರ ಹೆಲ್ಮೆಟ್ ಜಾಗೃತಿ ಅಭಿಯಾನ; ಬಂಕ್ ಮಾಲೀಕರ ಸಹಕಾರ ಕೋರಿದ ಪೊಲೀಸ್ ಆಯುಕ್ತರು

ಒಂದು ವಾರ ಹೆಲ್ಮೆಟ್ ಜಾಗೃತಿ ಅಭಿಯಾನ; ಬಂಕ್ ಮಾಲೀಕರ ಸಹಕಾರ ಕೋರಿದ ಪೊಲೀಸ್ ಆಯುಕ್ತರು
ಬೆಳಗಾವಿ: ರಸ್ತೆ ಅಪಘಾತಗಳಲ್ಲಿ ಸಂಭವಿಸುತ್ತಿರುವ ಸಾವು-ನೋವುಗಳನ್ನು ತಗ್ಗಿಸುವ ಉದ್ದೇಶದಿಂದ ಬೆಳಗಾವಿ ನಗರ ಪೊಲೀಸರು ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಇಂದಿನಿಂದ ಒಂದು ವಾರ ಕಾಲ ನಗರ ವ್ಯಾಪ್ತಿಯಲ್ಲಿ ವಿಶೇಷ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೇ ಸಂಚರಿಸುವ ಪರಿಣಾಮ ಅಪಘಾತ ಸಂಭವಿಸಿದಾಗ ಗಂಭೀರ ಗಾಯಗಳು ಹಾಗೂ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ ಸಾಕಷ್ಟು ಸವಾರರು ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ ಬೊರಸೆ ಅವರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಹೆಲ್ಮೆಟ್ ಧರಿಸದೇ ಬರುವ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಪೂರೈಕೆ ಮಾಡದಂತೆ ಸಹಕರಿಸುವಂತೆ ನಗರದಲ್ಲಿನ ಪೆಟ್ರೋಲ್ ಬಂಕ್ ಮಾಲೀಕರಿಗೆ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಅಭಿಯಾನದ ಮೂಲಕ ಸವಾರರಲ್ಲಿ ಸುರಕ್ಷತಾ ಅರಿವು ಮೂಡಿಸಿ, ಹೆಲ್ಮೆಟ್ ಧಾರಣೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಪ್ರೇರೇಪಿಸುವುದು ಪೊಲೀಸ್ ಇಲಾಖೆಯ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ವಾಹನ ಚಲಾಯಿಸುವ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.



